ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರಿಗೆ ಆಹ್ವಾನ ಪ್ರಶ್ನಿಸಿ ಪ್ರತಾಪ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

Photo credit: PTI
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಸಹಿತ ಮೂವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಸಕ್ತ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರತಾಪ ಸಿಂಹ, ಬೆಂಗಳೂರಿನ ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್. ಸೌಮ್ಯಾ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
“ರಾಜ್ಯ ಸರಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ ಅಥವಾ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಹೇಗೆ ವಿರುದ್ಧ ಎಂದು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿರುವುದರಂದ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ವಿಸ್ತೃತ ಆದೇಶ ಆನಂತರ ಪ್ರಕಟಿಸಲಾಗುವುದು“ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.
ವಾದ-ಪ್ರತಿವಾದ:
ಇದಕ್ಕೂ ಮೊದಲು ಪ್ರತಾಪ ಸಿಂಹ ಪರ ವಕೀಲ ಎಸ್.ಸುದರ್ಶನ್, “ಬಾನು ಮುಷ್ತಾಕ್ ಹಿಂದೂ ಸಂಪ್ರದಾಯ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಆಯ್ಕೆಯಾದವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಶಿಷ್ಟಾಚಾರ. ಇದನ್ನು ಪಾಲಿಸಲಾಗಿಲ್ಲ. ಬಾನು ಮುಷ್ತಾಕ್ ಅವರಿಗೆ ಅರಿಶಿಣ-ಕುಂಕುಮದ ಮೇಲೆ ನಂಬಿಕೆ ಇಲ್ಲ. ದಸರಾ ಹಿಂದೂ ಹಬ್ಬವಾಗಿದ್ದು, ಜಾತ್ಯತೀತ ಹಬ್ಬವಲ್ಲ” ಎಂದು ಪ್ರತಿಪಾದಿಸಿದರು.
ಇದಕ್ಕೆ ಪೀಠವು “ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಅವರಿಗೆ ಸೇರಿದ ವಿಚಾರ” ಎಂದಿತು.
ಇನ್ನೊಬ್ಬರು ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಎ.ಪಿ.ರಂಗನಾಥ್, “ಹಿಂದೂ ದೇವರ ಪೂಜೆಯನ್ನು ಆಗಮ ಶಾಸ್ತ್ರದಿಂದ ಪ್ರತ್ಯೇಕಿಸಲಾಗದು. ಹಿಂದೂಯೇತರ ವ್ಯಕ್ತಿಯು ದಸರಾ ಉದ್ಘಾಟಿಸಬಹುದೇ ಎಂಬ ಪ್ರಶ್ನೆ ಇಲ್ಲಿದೆ. ಹಿಂದೂ ದೇವರ ಮೇಲೆ ನಂಬಿಕೆ ಇದೆ ಎಂದು ಬಾನು ಮುಷ್ತಾಕ್ ಸ್ಪಷ್ಟಪಡಿಸಿದರೆ ನಮಗೆ ಯಾವುದೇ ಆಕ್ಷೇಪವಿಲ್ಲ” ಎಂದರು.
ರಾಜ್ಯ ಸರಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, “ಅರ್ಜಿದಾರ ಪ್ರತಾಪ ಸಿಂಹ ಅವರಿಗೆ ದಂಡ ವಿಧಿಸಬೇಕು. ಪ್ರತಾಪ್ ಸಿಂಹ ಸಂಸದರಾಗಿದ್ದಾಗ ನಿಸಾರ್ ಅಹ್ಮದ್ ದಸರಾ ಉದ್ಘಾಟಿಸಿದ್ದರು. ಈ ವಿಚಾರವನ್ನು ಅವರು ಬಹಿರಂಗಪಡಿಸಿಲ್ಲ. ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿ ಪುರಸ್ಕೃತರಾಗಿದ್ದು, ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಕವಿ ನಿಸಾರ್ ಅಹ್ಮದ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದಾಗ ಪ್ರತಾಪ್ ಸಿಂಹ ಈ ವಿಚಾರ ಎತ್ತಿಲ್ಲ. ಇದು ರಾಜ್ಯದ ಹಬ್ಬವಾಗಿದ್ದು, ಸರ್ಕಾರದ ನಿರ್ಧಾರವು ಸಂವಿಧಾನದ 15ನೇ ವಿಧಿಗೆ ಪೂರಕವಾಗಿದೆ. ಎಲ್ಲಾ ಪಕ್ಷಗಳ ಮುಖಂಡರ ದಸರಾ ಸಮಿತಿಯು ಅತಿಥಿ ಆಯ್ಕೆಯನ್ನು ಮುಖ್ಯಮಂತ್ರಿಗೆ ನೀಡಿತ್ತು. ಮುಖ್ಯಮಂತ್ರಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಾರೆ” ಎಂದರು.
“ಹಿಂದೂ-ಮುಸ್ಲಿಮ್ ಎಂದು ಕಂದಕ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮವಾಗಬೇಕು. ಇದನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ದಸರಾ ಜಾತ್ಯತೀತ ಹಬ್ಬವಾಗಿದ್ದು, ಇದನ್ನು ಧಾರ್ಮಿಕ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ” ಎಂದು ಆಕ್ಷೇಪಿಸಿದರು.
ಈ ವೇಳೆ ಸುದರ್ಶನ್, “ನಿಸಾರ್ ಅಹ್ಮದ್ ಮುಸ್ಲಿಮ್ ಆಗಿದ್ದರೂ ಕನ್ನಡ ಮಾತೆಯ ಬಗ್ಗೆ ಪದ್ಯ ಬರೆದಿದ್ದಾರೆ. ನಿಸಾರ್ ಕನ್ನಡ ವಿರೋಧಿ ಹೇಳಿಕೆ ನೀಡಿರಲಿಲ್ಲ” ಎಂದರು.
ಈ ಹಂತದಲ್ಲಿ ಪೀಠವು “ವಿಜಯದಶಮಿ ಎಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ ಎಂಬುದಾಗಿದೆ. ಈ ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ” ಎಂದಿತು. ಅದಾಗ್ಯೂ, ವಾದ ಮುಂದುವರಿಸಲು ಯತ್ನಿಸಿದ ಪ್ರತಾಪ್ ಸಿಂಹ ಪರ ವಕೀಲರನ್ನು ಕುರಿತು ಪೀಠವು “ನಮ್ಮ ಆದೇಶ ನೀಡಲಾಗಿದೆ. ದಂಡ ವಿಧಿಸಬೇಕೆ? ಈ ನ್ಯಾಯಾಲಯದಲ್ಲಿ ನೀವು ಹೀಗೆಲ್ಲಾ ಮಾಡಲಾಗದು" ಎಂದು ಏರುಧ್ವನಿಯಲ್ಲಿ ನುಡಿಯಿತು ಎಂದು 'ಬಾರ್ & ಬೆಂಚ್' ವರದಿ ಮಾಡಿದೆ.