ತುಮಕೂರು | ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ : ನಿಷೇಧಾಜ್ಞೆ ಜಾರಿ

ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕು ಸಂಕಾಪುರ ಗ್ರಾಮ, ಡಿ.ರಾಂಪುರ ಗ್ರಾಮದಲ್ಲಿ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳದ 10 ಕಿ.ಮೀ. ಸುತ್ತಳತೆಯ ಪ್ರದೇಶಕ್ಕೆ ಅನ್ವಯವಾಗುವಂತೆ ಮೇ 31ರ ಬೆಳಗ್ಗೆ 6 ರಿಂದ ಜೂನ್ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಗುಬ್ಬಿ ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಿ.ಆರತಿ ಆದೇಶ ಹೊರಡಿಸಿದ್ದಾರೆ.
ಹೇಮಾವತಿ ಎಕ್ಸ್ ಪ್ರೆಸ್ ಪೈಪ್ಲೈನ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯವರು ಮೇ 31ರಂದು ಬೃಹತ್ ಪ್ರತಿಭಟನೆ ಚಳುವಳಿಯನ್ನು ಹಮ್ಮಿಕೊಂಡಿರುವುದರಿಂದ ಕಾಮಗಾರಿ ನಿರ್ವಹಣೆಗೆ ಅಡಚಣೆಯುಂಟಾಗಿ ಕಾಮಗಾರಿ ಸ್ಥಳದಲ್ಲಿರುವ ಮಿಷನರಿ ವಸ್ತುಗಳ ನಾಶಪಡಿಸುವ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟ ಉಂಟಾಗುವ ಸಾಧ್ಯತೆಯಿರುವುದರಿಂದ ಈ ನಿಷೇಧಾದೇಶವನ್ನು ಹೊರಡಿಸಲಾಗಿದೆ.
ಈ ಆದೇಶದನ್ವಯ ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪು ಸೇರಿ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವಂತಿಲ್ಲ. ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲೀ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ರೀತಿಯ ಜನಸಾಮಾನ್ಯರ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದಾಗಲಿ, ಘೋಷಣೆ ಕೂಗುವುದಾಗಲಿ ಮಾಡುವಂತಿಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕ ಪ್ರಾಣ ಮತ್ತು ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸಬಾರದು. ಈ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ-ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ.
ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.