ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಬೆಳಗಾವಿ, ಸೆ.9: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ ಎಂದು ಹೇಳಿದರು.
ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಅಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದರು.
ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ. ಬೀದಿ ಬೀದಿಗಳಲ್ಲಿ ಹೋಗಿ ಪ್ರಚಾರ ಮಾಡಿ. ಮಕ್ಕಳ ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ, ಮಕ್ಕಳನ್ನು ಹೆಚ್ಚು ಆಕರ್ಷಿಸಿ ಎಂದು ಅಧಿಕಾರಿಗಳಿಗೆ ಅವರು ಕರೆ ನೀಡಿದರು.
ಅಂಗನವಾಡಿ ಕಟ್ಟಡಗಳ ಬಾಡಿಗೆ, ಮಕ್ಕಳಿಗೆ ಹಂಚುವ ಮೊಟ್ಟೆಗಳಿಗೆ ಅನುದಾನ ಕೊರತೆ ಇಲ್ಲ. ಇವುಗಳನ್ನು ವಿಳಂಬವಿಲ್ಲದೆ ಪಾವತಿಸಿ. ಪ್ರತಿ ತಿಂಗಳು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಿ. ಇಲಾಖೆಯ ಕೆಲಸಗಳು ಸುಗಮವಾಗಿ ನಡೆಯಬೇಕು. ಅಗತ್ಯ ಸುಧಾರಣೆಯಾಗಬೇಕು. ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸಕ್ಷಮ ಯೋಜನೆಯಲ್ಲಿ ವಿಶೇಷ ಪ್ರಯತ್ನ ಮಾಡಿ ರಾಜ್ಯಕ್ಕೆ 17,500 ಅಂಗನವಾಡಿ ತರಲಾಗಿದೆ. ದೊಡ್ಡ ರಾಜ್ಯಗಳಿಗೂ ಸಿಗದಷ್ಟು ನಮಗೆ ಸಿಕ್ಕಿದೆ. ಕೇಂದ್ರ ಸರಕಾರ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಬೇರೆ ರಾಜ್ಯಗಳಿಗೆ ಮಾದರಿಯಾಗಿ ಉದಾಹರಿಸುತ್ತಿದೆ. ಹಾಗಾಗಿ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಮುಹಮ್ಮದ್ ರೋಶನ್, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ಆಯುಕ್ತ ಗುಲಾಬರಾವ್ ಭೂಷಣ ಬೋರಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಮಹೇಶ್ ಬಾಬು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಡಿಎಸ್ಪಿ ನಿರಂಜನ್ ರಾಜೇ ಅರಸ್, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.