ಬೆಳಗಾವಿ : ಕುರ್ಆನ್ ದಹನ ಖಂಡಿಸಿ ಬೃಹತ್ ಪ್ರತಿಭಟನೆ

ಬೆಳಗಾವಿ : ಇಲ್ಲಿನ ಸಂತಿಬಸ್ತವಾಡ ಗ್ರಾಮದಲ್ಲಿ ಕುರ್ಆನ್ ಪ್ರತಿಗೆ ಬೆಂಕಿ ಹಚ್ಚಿದ್ದನ್ನು ಖಂಡಿಸಿ ಮುಸ್ಲಿಮರು ಶುಕ್ರವಾರ (ಮೇ.16) ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಸಂತಿ ಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥವನ್ನು ದಹಿಸಿರುವ ಪ್ರಕರಣ ನಡೆದು ನಾಲ್ಕು ದಿನ ಕಳೆದರೂ ಇನ್ನೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಪ್ರಕರಣ ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಘಟನೆಯನ್ನು ಖಂಡಿಸಿದರು.
ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ಸ್ಥಳದಲ್ಲಿ ಎರಡು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ಬೆಂಬಲ ಸೂಚಿಸಿದ್ದರು.
ನಿಷೇಧಾಜ್ಞೆ ಜಾರಿ:
ಮುಂಜಾಗೃತಾ ಕ್ರಮವಾಗಿ ನಗರ ಪೊಲೀಸ್ ಕಮಿಷನರ್ ಅವರು ಸ್ಥಳದಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಕರ್ತವ್ಯ ಲೋಪ ಎಸಗಿದ ಇನ್ಸ್ಪೆಕ್ಟರ್ ಅಮಾನತು :
ಸಂತಿಬಸ್ತವಾಡ ಗ್ರಾಮದಲ್ಲಿ ಕುರ್ಆನ್ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಬೆಳಗಾವಿ ಗ್ರಾಮೀಣ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಲಾಗಿದೆ ಎಂದು ಬೆಳಗಾವಿಯಲ್ಲಿ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ತಿಳಿಸಿದ್ದಾರೆ.
ದುಷ್ಕರ್ಮಿಗಳನ್ನು ಪತ್ತೆ ಮಾಡಲು ಐದು ತನಿಖಾ ತಂಡ ರಚನೆ ಮಾಡಲಾಗಿದೆ. ಬೆಳಗಾವಿ ನಗರದಲ್ಲಿ ಶಾಂತಿ ಕಾಪಾಡುವುದಕ್ಕೆ ಎಲ್ಲರೂ ಕೈ ಜೋಡಿಸಬೇಕು. ಕುರ್ಆನ್ ದಹನ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನ ಪತ್ತೆ ಮಾಡಿ ಕಾನೂನು ಕ್ರಮ ವಹಿಸುತ್ತೇವೆ ಎಂದು ಹೇಳಿದರು.