ಚಿಕ್ಕಮಗಳೂರು ಜಿಲ್ಲೆಯಲ್ಲಿ ತಗ್ಗಿದ ಮಳೆ; ಅಲ್ಲಲ್ಲಿ ಮುಂದುವರಿದ ಅವಾಂತರ
ಮುಳ್ಳಯ್ಯನಗಿರಿ ಶ್ರೇಣಿ ವ್ಯಾಪ್ತಿಯಲ್ಲಿ ಭೂ ಕುಸಿತ

ಚಿಕ್ಕಮಗಳೂರು : ಕಳೆದೊಂದು ವಾರದಿಂದ ಕಾಫಿನಾಡಿನಲ್ಲಿ ಜನಜೀವನ ಅಸ್ತವ್ಯಸ್ತಗೊಳಿಸಿದ್ದ ಭಾರೀ ಮಳೆ ಮಂಗಳವಾರ ಕೊಂಚ ಬಿಡುವು ನೀಡಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಬೆಳಗ್ಗೆ ಧಾರಾಕಾರ ಮಳೆಯಾಗಿರುವುದನ್ನು ಹೊರತು ಪಡಿಸಿದರೇ ಉಳಿದಂತೆ ಇಡೀ ದಿನ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ. ಜಿಲ್ಲಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಅಲ್ಲಲ್ಲಿ ಮಳೆಯ ಅವಾಂತರ ಮುಂದುವರಿದಿದೆ.
ಮಂಗಳವಾರ ಬೆಳಗ್ಗೆ ಸುರಿದ ಮಳೆಗೆ ಕೊಪ್ಪ ತಾಲೂಕಿನಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದರೆ, ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಗಿರಿಶ್ರೇಣಿಯಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದ ಘಟನೆ ಮಂಗಳವಾರ ನಡೆದಿದೆ.
ಮಂಗಳವಾರ ಬೆಳಗ್ಗೆ ಕೊಪ್ಪ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಭಾರೀ ಮಳಗೆ ತಾಲೂಕಿನ ಬಿಂತ್ರುವಳ್ಳಿ ಗ್ರಾಮದಲ್ಲಿ ಮನೆಯೊಂದರ ಮುಂದಿದ್ದ ಧರೆ ಕುಸಿದು ಮನೆಯ ಮುಂಭಾಗ ಜಖಂಗೊಂಡಿದೆ. ತಾಲೂಕಿನ ಕೊಗ್ರೆ ಗ್ರಾಮ ಸಮೀಪದ ಕಲ್ಲುಗುಡ್ಡೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಅಡಿಕೆ ಮರ ಉರುಳಿ ಬಿದ್ದು ಮನೆಯ ಛಾವಣಿ ಜಖಂಗೊಂಡಿದ್ದು, ಈ ಘಟನೆಗಳಲ್ಲಿ ಮನೆಯಲ್ಲಿದ್ದವರು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಮಂಗಳವಾರ ಬೆಳಗ್ಗೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು, ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೇ ಕತ್ತಲೆಯಲ್ಲಿ ಮುಳುಗಿವೆ. ಮಳೆಯ ಅಬ್ಬರ ಕಡಿಮೆಯಾಗಿರುವುದರಿಂದ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವು ಕೊಂಚ ಇಳಿಕೆಯಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಆಗಾಗ್ಗೆ ಸಾಧಾರಣ ಮಳೆಯಾಗಿದ್ದರೆ, ಮಧ್ಯಾಹ್ನದ ಬಳಿಕ ಮಳೆ ಸಂಪೂರ್ಣವಾಗಿ ಬಿಡುವು ನೀಡಿತ್ತು. ಚಿಕ್ಕಮಗಳೂರು, ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು.