ದಾವಣಗೆರೆ | ಬೈಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಆರ್ಟಿಒ ಕಚೇರಿ ಅಧೀಕ್ಷಕ ಮೃತ್ಯು

ದಾವಣಗೆರೆ: ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ನಗರದ ರಿಂಗ್ ರೋಡ್ನಲ್ಲಿರುವ ನವೋದಯ ಶಾಲೆ ಎದುರು ಶುಕ್ರವಾರ ಸಂಭವಿಸಿದೆ.
ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಣಿ ನಿವಾಸಿ ತಿಪ್ಪೇಸ್ವಾಮಿ(43) ಎಂದು ಗುರುತಿಸಲಾಗಿದೆ. ಇವರು ಆರ್ಟಿಒ ಕಚೇರಿಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ತಿಪ್ಪೇಸ್ವಾಮಿ ಇಂದು ಬೆಳಗ್ಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದ ತಿಪ್ಪೇಸ್ವಾಮಿಯ ತಲೆಯ ಮೇಲೆ ಬಸ್ಸಿನ ಚಕ್ರ ಹರಿದಿದೆ. ಹೆಲ್ಮೆಟ್ ಧರಿಸಿದ್ದರೂ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಕುರಿತು ತಕ್ಷಣವೇ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹಾಗೂ ನಗರ ಡಿವೈಎಸ್ಪಿ ಶರಣಬಸವೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.