ದೇಶದ ವಿಷಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ರಾಜಕಾರಣ ಮಾಡಲ್ಲ : ಸಲೀಂ ಅಹ್ಮದ್

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು, ವಿಜಯನಗರದಲ್ಲಿ ನಡೆಯುವ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಎರಡು ವರ್ಷದ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ. ಮೇ 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಮುಖಂಡರು, 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.
ದೇಶದ ವಿಷಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ. ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದೇವೆ. ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇವೆ, ಇಡೀ ದೇಶ ಸೈನಿಕರ ಜೊತೆಯಿದೆ ಎಂದರು.
ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲವಿಲ್ಲ. ಮೇ 20ರಂದು ದೊಡ್ಡ ಸಮಾವೇಶ ಮಾಡುತ್ತೇವೆ, ವಿರೋಧಪಕ್ಷದವರು ಮೊದಲು ಅವರ ಪಕ್ಷ ಹೇಗಿದೆ ಎಂದು ನೋಡಿಕೊಳ್ಳಲಿ. ಯತ್ನಾಳ್ ಕಥೆ ಏನಾಗಿದೆ ಎಂದು ಅವರಿಗೆ ಗೊತ್ತಿಲ್ಲವೆ? ಎಂದ ಅವರು, ರಾಜ್ಯಕ್ಕೆ ಅನುದಾನ ಬರುವಲ್ಲಿ ಕೇಂದ್ರದಿಂದ ಅನ್ಯಾಯ ಆಗತ್ತಿದ್ದು, ಮಲತಾಯಿ ಧೋರಣೆ ತೋರಿಸುತ್ತಿದೆ. ಮಹದಾಯಿ ಸೇರಿದಂತೆ ಅನೇಕ ಯೋಜನೆಗಳು ಹಾಗೇ ಇವೆ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದೆ ಎಂದರು.
ಭಾರತೀಯ ಜನತಾ ಪಕ್ಷದವರು ನಡೆಸುತ್ತಿರುವ ತಿರಂಗಾ ಯಾತ್ರಾ ಕುರಿತು ಪ್ರತಿಕ್ರಿಯೆ ನೀಡಿ, ಬೆಂಗಳೂರಲ್ಲಿ ತಿರಂಗಾ ಯಾತ್ರೆ ನಾವು ಮಾಡಿದ್ದೇವೆ. ಬಿಜೆಪಿಯವರು ಈಗ ಮಾಡುತ್ತಿದ್ದಾರೆ. ಅದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಈ ವಿಷಯದಲ್ಲಿ ರಾಜಕಾರಣ ಮಾಡಬಾರದು ಎನ್ನುವುದು ನಮ್ಮ ಆಶಯ ಎಂದರು