ʼದಸರಾʼ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿದ ಬಿಜೆಪಿ ಸಂಸದ ಯದುವೀರ್ ಒಡೆಯರ್

ಯದುವೀರ್ ಒಡೆಯರ್/ಬಾನು ಮುಷ್ತಾಕ್
ಮಡಿಕೇರಿ : ʼನಾಡಹಬ್ಬ ದಸರಾ ಉದ್ಘಾಟಕರಾಗಿ ಪ್ರತಿಷ್ಠಿತ ʼಬೂಕರ್ ಪ್ರಶಸ್ತಿʼ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆʼ ಎಂದು ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ಕೊಟ್ಟಿರುವ ಕೊಡುಗೆಗಳು ಅಪಾರವಾಗಿದೆ. ಅವರನ್ನು ರಾಜ್ಯ ಸರಕಾರ ಆಯ್ಕೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ? : ಪ್ರತಾಪ್ ಸಿಂಹ
ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ. ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಮುಷ್ತಾಕ್ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ? ಕಾಂತಾರದ ರಿಷಬ್ ಶೆಟ್ಟರಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು. ಅವರನ್ನು ದಸರಾ ಉದ್ಘಾಟನೆಗೆ ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಕಾಂತಾರ ಹಿಂದೂ ಧರ್ಮಕ್ಕೆ ಪೂರಕ ಸಿನೆಮಾ. ಅದರ ನಿರ್ದೇಶಕ, ನಟ ರಿಷಬ್. ಅವರನ್ನು ಕರೆಯುತ್ತೀರಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದರು.
ಅಲ್ಲದೆ, ಬಹುತೇಕ ಬಿಜೆಪಿ ನಾಯಕರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರಕಾರದ ನಿರ್ಧಾರವನ್ನು ವಿರೋಧಿಸಿದ್ದರು. ಈ ಬೆನ್ನಲ್ಲೇ ಸಂಸದ ಯದುವೀರ್ ಒಡೆಯರ್ ರಾಜ್ಯ ಸರಕಾರದ ಆಯ್ಕೆಯನ್ನು ಸ್ವಾಗತಿಸಿದ್ದಾರೆ.