ಸಿಎಂ ಸಿದ್ದರಾಮಯ್ಯ ನನ್ನ ಪಾಲಿನ ಎರಡನೇ ಅಂಬೇಡ್ಕರ್ : ಮಾಜಿ ಸಚಿವ ಎಚ್.ಆಂಜನೇಯ

ಎಚ್.ಆಂಜನೇಯ
ಕೊಪ್ಪಳ : ‘ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿಯೂ ಅಳವಡಿಸಿಕೊಂಡಿದ್ದು, ಅವರೇ ನನ್ನ ಪಾಲಿನ ಎರಡನೇ ಅಂಬೇಡ್ಕರ್ ಇದ್ದಂತೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಪರಿಷತ್, ಸಚಿವ ಸ್ಥಾನ ಸೇರಿದಂತೆ ಯಾವುದೇ ಸ್ಥಾನಮಾನದ ಅಗತ್ಯವಿಲ್ಲ. ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಮಾಡಿದರೆ ಅದೇ ನನಗೆ ದೊಡ್ಡ ಸ್ಥಾನಮಾನ ಎಂದು ಹೇಳಿದರು.
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಮಾದಿಗ ಸಮುದಾಯದ ಹಲವು ಮಂದಿ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ನಮ್ಮ ಕಾಂಗ್ರೆಸ್ ಸರಕಾರದ ಅವಧಿಯಲ್ಲಿಯೇ ಒಳಮೀಸಲಾತಿ ಜಾರಿಯಾಗಲಿದೆ ಎಂದು ಆಂಜನೇಯ ಭರವಸೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಮಾಡುವ ನಿಟ್ಟಿನಲ್ಲಿ ಜೇನುಗೂಡಿಗೆ ಕೈ ಹಾಕಿಲ್ಲ. ಬದಲಿಗೆ ಶೋಷಿತರಲ್ಲೇ ಶೋಷಿತರಾಗಿರುವ ಸಮುದಾಯಗಳಿಗೆ ಜೇನಿನ ಸಿಹಿಯನ್ನು ಹಂಚಲು ಮುಂದಾಗಿದ್ದಾರೆ. ಆ ಹಿನ್ನೆಲೆಯಲ್ಲೇ ಪರಿಶಿಷ್ಟ ಜಾತಿ ಸಮೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.