ಮಾಹಿತಿ ಹಕ್ಕು ಅಧಿನಿಯಮದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಅತ್ಯವಶ್ಯಕ : ರುದ್ರಣ್ಣ ಹರ್ತಿಕೋಟೆ

ಕೊಪ್ಪಳ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವನ್ನು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತು ಮುಂಬರುವ ದಿನಗಳಲ್ಲಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ಮಾಡಲಾಗುತ್ತಿದೆ ಎಂದು ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದ್ದಾರೆ.
ಶನಿವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಾಹಿತಿ ಹಕ್ಕು ಅಧಿನಿಯಮ-2005ರ ಕುರಿತು ಕೊಪ್ಪಳ ವಿವಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಪ್ರಬಲವಾಗಬೇಕು. ಜನರಿಗೆ ಸರಕಾರದ ಮಾಹಿತಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಡಾ.ಮನಮೋಹನ ಸಿಂಗ್ ನೇತೃತ್ವದ ಸರಕಾರವು 2005ರ ಅ.5ರಂದು ಆರ್ಟಿಐ ಕಾಯ್ದೆಯನ್ನು ಜಾರಿಗೊಳಿಸಿತು. ಈ ಕಾಯ್ದೆಯನ್ನು ಜಾರಿ ತಂದ ಮೊಟ್ಟ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಮಾಹಿತಿ ನೀಡಿದರು.
ಆರ್ಟಿಐ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವನ್ನು ಮೂಡಿಸಲು ಕರ್ನಾಟಕ ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆಗಳನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕಾನೂನು ಅರಿವು ಮೂಡಿಸಲಾಗುತ್ತಿದೆ. ಶಿಕ್ಷಣದ ಹಂತದಲ್ಲಿಯೇ ಮಕ್ಕಳಿಗೂ ಆರ್ಟಿಐ ಕಾಯ್ದೆಯ ಕುರಿತು ಅರಿವನ್ನು ಮೂಡಿಸುವ ಕೆಲಸವಾಗಬೇಕಿದೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಲಾಗಿದೆ. ಕಾಯ್ದೆ ಬಗ್ಗೆ ಎಲ್ಲರಲ್ಲಿಯೂ ಸ್ಪಷ್ಟ ಮಾಹಿತಿ ಇದ್ದಾಗ ಮಾತ್ರ ಅದು ಪರಿಣಾಮಕಾರಿಯಾಗಿ ಅನುಷ್ಠಾನವಾಗಲು ಸಾಧ್ಯವಾಗುತ್ತದೆ ಎಂದು ರುದ್ರಣ್ಣ ಹರ್ತಿಕೋಟೆ ತಿಳಿಸಿದರು.
ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ ಮಾತನಾಡಿ, ಸಾಮಾಜಿಕ ಬದಲಾವಣೆ ಆಗಬೇಕಾದರೆ ಶೈಕ್ಷಣಿಕ ಕೇಂದ್ರಗಳು ಮತ್ತು ವಿಶ್ವವಿದ್ಯಾನಿಲಯಗಳಿಂದ ಮಾತ್ರ ಸಾಧ್ಯ. ಜಗಜ್ಯೊತಿ ಬಸವಣ್ಣ ನಡೆದಾಡಿದಂತಹ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದಿಂದ ವಂಚಿತವಾಗುತ್ತಿರುವ ಹಲವಾರು ಹೆಣ್ಣು ಮಕ್ಕಳಿಗೆ ಶಿಕ್ಷಣದತ್ತ ಕೊಂಡೊಯ್ಯಲು ಹಾಗೂ ಬಾಲ್ಯವಿವಾಹ ನಿರ್ಬಂಧ ಮತ್ತು ಅಪೌಷ್ಠಿಕ ನಿವಾರಣೆಗಾಗಿ ವಿಶ್ವವಿದ್ಯಾನಿಲಯವು ಈ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಇದಕ್ಕಾಗಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಕೈಜೋಡಿಸಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಮಾಹಿತಿ ಆಯುಕ್ತರಾದ ಡಾ.ಹರೀಶ್ ಕುಮಾರ್, ರಾಜಶೇಖರ್ ಎಸ್, ಬದ್ರುದ್ದೀನ್ ಕೆ, ಕೊಪ್ಪಳ ವಿವಿ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್, ಗಂಗಾವತಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಮುಮ್ತಾಝ್ ಬೇಗಂ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಕೆ.ಎಚ್.ಛತ್ರದ ಸೇರಿದಂತೆ ಹಲವರು ಭಾಗವಹಿಸಿದ್ದರು.