ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಬಂಧ ಸತ್ಯಾಸತ್ಯತೆ ತಿಳಿಯಲು ನಿಯೋಗ ರಚಿಸಿದ ಕಾಂಗ್ರೆಸ್

ಸಾಂದರ್ಭಿಕ ಚಿತ್ರ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಹಾಗೂ ನೈಜತೆಯನ್ನು ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ರಚನೆ ಮಾಡಲಾಗಿದೆ.
ಈ ಸಂಬಂಧ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕರಾದ ಎನ್.ಎ.ಹ್ಯಾರಿಸ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ ಅವರು ಇದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆ ಹಾಗೂ ಪ್ರಕರಣಗಳು ಮಾಧ್ಯಮಗಳಲ್ಲಿ ಕೊಲೆ, ಸುಲಿಗೆ, ಹತ್ಯೆ ಎಂಬಿತ್ಯಾದಿ ವ್ಯಾಖ್ಯಾನಗಳಿಂದ ವ್ಯಾಪಕವಾಗಿ ಪ್ರಚಾರವಾಗುತ್ತಿವೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ಸತ್ಯಾಸತ್ಯತೆ ಹಾಗೂ ನೈಜತೆಯನ್ನು ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ರಚನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ನಿಯೋಗಲ್ಲಿರುವ ಮುಖಂಡರುಗಳು ಕೂಡಲೇ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಘಟನೆ ನಡೆದ ಸ್ಥಳ ಹಾಗೂ ಪ್ರದೇಶಗಳಲ್ಲಿ ಸಂಬಂಧಪಟ್ಟ ಸಂತ್ರಸ್ತ ಕುಟುಂಬಗಳು ಹಾಗೂ ಸ್ಥಳೀಯರೊಂದಿಗೆ ಚರ್ಚಿಸಿ ಈ ಎಲ್ಲಾ ಪ್ರಕರಣಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಒಂದು ವಾರದ ಒಳಗಾಗಿ ಸಮಗ್ರ ಪ್ರಕರಣಗಳ ಬಗ್ಗೆ ವರದಿಯನ್ನು ಕೆಪಿಸಿಸಿಗೆ ಸಲ್ಲಿಸಲು ಸೂಚನೆ ನೀಡಲಾಗಿದೆ.