ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರನ್ನು ʼಪಾಕಿಸ್ತಾನಿʼ ಎಂದು ನಿಂದಿಸಿರುವ ಎನ್.ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ʼನಾಯಿʼಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಿಧಾನ ಪರಿಷತ್ತಿನ ಸದಸ್ಯರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ವಿಧಾನಪರಿಷತ್ನ ಆಡಳಿತ ಪಕ್ಷದ ನಾಯಕರಾದ ಎನ್.ಎಸ್.ಭೋಸರಾಜು, ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರ ನೇತೃತ್ವದ ನಿಯೋಗ ಇಂದು(ಗುರುವಾರ) ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿತು.
ವಿಧಾನಪರಿಷತ್ ಆಡಳಿತ ಪಕ್ಷದ ನಾಯಕರಾದ ಎನ್.ಎಸ್.ಭೋಸರಾಜು ಅವರು ಮಾತನಾಡಿ, "ವಿಧಾನಪರಿಷತ್ ಸದಸ್ಯರುಗಳಾದ ಎನ್.ರವಿಕುಮಾರ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ಬೀದಿಯಲ್ಲಿ ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ. ʼಸಬ್ ಕಾ ಸಾಥ್ ಸಬ್ ಕಾ ವಿಕಾಸ್ʼ ಎನ್ನುವ ಬಿಜೆಪಿ ಸದಸ್ಯರು ಸಮಾಜವನ್ನು ಹೊಡೆಯುವ ಕೆಲಸ ಮಾಡ್ತಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದನ್ನು ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ದಲಿತ ಸಮುದಾಯವನ್ನು ಹೀಗೆಳೆಯುವಂತಹ ಹೇಳಿಕೆ ನೀಡಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಉಚ್ಚಾಟನೆ ಮಾಡಬೇಕು. ಹಾಗೆಯೇ, ಅಧಿಕಾರಿಯ ಬಗ್ಗೆ ಹೇಳಿಕೆ ನೀಡಿರುವ ರವಿಕುಮಾರ್ ಅವರ ವಿರುದ್ದ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.
ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ಮಾತನಾಡಿ, ಕಾಂಗ್ರೆಸ್ ವಿಧಾನಪರಿಷತ್ತಿನ ಸದಸ್ಯರುಗಳ ನಿಯೋಗದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರವಿಕುಮಾರ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ದ ಎರಡು ದೂರು ಸಲ್ಲಿಸಿದ್ದೇವೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಛಲವಾದಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಹೇಳಿರುವ ರವಿಕುಮಾರ್ ಅವರನ್ನು ಅಮಾನತುಗೊಳಿಸಬೇಕು. ಇವರಿಬ್ಬರೂ ಸಮಾಜದಲ್ಲಿ ತಪ್ಪು ಸಂದೇಶ ಕೊಡುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯರುಗಳಾದ ವಸಂತ್ಕುಮಾರ್, ಅನಿಲ್ ಕುಮಾರ್ ಎಂ.ಎಲ್., ಜಗದೇವ ಗುತ್ತೇದಾರ್, ಎಸ್.ರವಿ, ಡಿ.ಟಿ.ಶ್ರೀನಿವಾಸ್, ದಿನೇಶ್ ಗೂಳಿಗೌಡ್, ಚನ್ನರಾಜ್ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ನಸೀರ್ ಅಹ್ಮದ್, ಗೋವಿಂದರಾಜು, ನಾಗರಾಜ್ ಯಾದವ್, ಮಂಜುನಾಥ್ ಭಂಡಾರಿ ನಿಯೋಗದಲ್ಲಿ ಉಪಸ್ಥಿತರಿದ್ದರು.