ಬಿಜೆಪಿಯು ರಾಜಕೀಯ ದುರುದ್ದೇಶದಿಂದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸುತ್ತಿದೆ : ಜಿ.ಪರಮೇಶ್ವರ್

ಜಿ.ಪರಮೇಶ್ವರ್
ಬೆಂಗಳೂರು: ತಾಂತ್ರಿಕ ಸಮಿತಿಯು ನೀಡಿದ ವರದಿಯನ್ನು ಆಧರಿಸಿ ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು.
ತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ ಬಿಜೆಪಿಯವರು ಪ್ರತಿಭಟನೆ ನಡೆಯುತ್ತಿರುವ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತುಮಕೂರಲ್ಲಿ ಎಕ್ಸ್ಪ್ರೆಸ್ ಕೆನಾಲ್ ಮಾಡಬೇಕು ಎಂದು ತೀರ್ಮಾನ ತೆಗೆದುಕೊಂಡು, ಒಂದೂವರೆ ಸಾವಿರ ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಯಿತು. ಕೆಲಸ ಶುರುವಾಗುತ್ತಿದ್ದಂತೆ ಬಿಜೆಪಿಯವರು ವಿರೋಧ ಮಾಡಿದರು. ಉಪ ಮುಖ್ಯಮಂತ್ರಿಯವರು ಈಗಗಲೇ ಸಭೆ ನಡೆಸಿದ್ದಾರೆ. ಸಂಸದರು, ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಟೆಕ್ನಿಕಲ್ ಕಮಿಟಿ ರಚಿಸಬೇಕು ಎಂದು ಒತ್ತಾಯಿಸಿದ್ದರು. ಕಾಮಗಾರಿ ಮಾಡಬಹುದು ಎಂದು ಟೆಕ್ನಿಕಲ್ ಕಮಿಟಿ ವರದಿ ನೀಡಿದೆ. ಅದರಂತೆ ಕೆಲಸ ಶುರುವಾಯಿತು. ವರದಿಯಲ್ಲಿ ಲಿಂಕ್ ಕೆನಾಲ್ನಿಂದ ತೊಂದರೆ ಆಗುತ್ತದೆ ಎಂದು ಬಂದಿದ್ದರೆ ಮಾಡುತ್ತಿರಲಿಲ್ಲ. ಈಗ ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ವಿರೋಧ ಮಾಡುತ್ತಿದ್ದಾರೆ ಎಂದರು.