ಮಾದಪ್ಪನಹಳ್ಳಿಯಲ್ಲಿ 154 ಎಕರೆಯಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ : ಈಶ್ವರ್ ಖಂಡ್ರೆ

ಬೆಂಗಳೂರು: ಇಲ್ಲಿನ ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 154 ಎಕರೆ ಅರಣ್ಯ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನವನ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮಾದಪ್ಪನಹಳ್ಳಿ ನೆಡುತೋಪಿನಲ್ಲಿ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವಶದಲ್ಲಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ವಿಧ್ಯುಕ್ತವಾಗಿ ಹಿಂಪಡೆಯಲು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕೃತವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಪಡೆಯಲಾಗಿದ್ದು, ಮುಂದಿನ 2 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಿಂದ ಉದ್ಯಾನವನಕ್ಕೆ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದರು.
ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತಿದೆ. ಈ ಉದ್ಯಾನ ಮುಂಬರುವ ದಿನಗಳಲ್ಲಿ ಉತ್ತರ ಬೆಂಗಳೂರಿಗೆ ಮಹತ್ವದ ಶ್ವಾಸ ತಾಣವಾಗಲಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ಇಲ್ಲಿ ಕೆ.ಎಫ್.ಡಿ.ಸಿ. ನೀಲಗಿರಿ ಮರ ಬೆಳೆಸಿದ್ದು, ಈ ಎಲ್ಲ ಮರಗಳನ್ನೂ ತೆರವು ಮಾಡಿ, ಸ್ಥಳೀಯ ಪ್ರಭೇದದ ಬಿಲ್ವ, ಮಹಾಬಿಲ್ವ, ಹೊನ್ನೆ, ನೇರಳೆ, ಮತ್ತಿ, ಆಲ, ಅರಳಿಯ ಜೊತೆಗೆ ಪಶ್ಚಿಮಘಟ್ಟದಲ್ಲಿ ಬೆಳೆಯುವ ವಿವಿಧ ಪ್ರಭೇದದ ಸಸ್ಯಗಳನ್ನೂ ಬೆಳೆಸಲು ಉದ್ದೇಶಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ಪ್ರಸ್ತುತ ಈ 154 ಎಕರೆ ಪ್ರದೇಶದಲ್ಲಿ ನೀಲಗಿರಿಯ ಜೊತೆಗೆ ಹೊನ್ನೆ, ಬೀಟೆ, ಜಾಲಿ, ಕಗ್ಗಲಿ, ಎಲಚಿ, ಚಿಗರೆ, ಹೊಳೆಮತ್ತಿ, ಮತ್ತಿ, ಕರಿಮತ್ತಿ ಮೊದಲಾದ 800 ಮರಗಳಿದ್ದು, ಅವುಗಳನ್ನು ಸಂರಕ್ಷಿಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಎಲ್ಲ 154 ಎಕರೆ ಅರಣ್ಯ ಭೂಮಿಗೂ ಕಾಂಪೌಂಡ್ ಹಾಕಲಾಗಿದ್ದು, ಒತ್ತುವರಿ ಆಗದಂತೆ ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಸಲಹೆ ಬಂದಿದೆ, ಈ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದರು.
ಕಾರ್ಯಕ್ರಮದಲ್ಲಿ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮನೋಹರ್, ಅರಣ್ಯಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಕಡೆ, ಕೆ.ಎಫ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರ್, ಹಿರಿಯ ಅರಣ್ಯಾಧಿಕಾರಿಗಳಾದ ಸೀಮಾ ಗಾರ್ಗ್, ಶಾಶ್ವತಿ ಮಿಶ್ರಾ, ಕುಮಾರ್ ಪುಷ್ಕರ್, ಶ್ರೀನಿವಾಸ್, ಶಿವಶಂಕರ್, ರವೀಂದ್ರ ಕುಮಾರ್, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ಅರಣ್ಯೇತರ ಉದ್ದೇಶಕ್ಕೆ ಬಳಕೆ ಇಲ್ಲ: ಇದೇ ಸಂದರ್ಭದಲ್ಲಿ ಉದ್ಯಾನದ ಸ್ವರೂಪದ ಬಗ್ಗೆ ಹಿರಿಯ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು ಮತ್ತು ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಈಶ್ವರ್ ಖಂಡ್ರೆ, ಮೀಸಲು ಅರಣ್ಯದಲ್ಲಿ ಅವಕಾಶವಿರುವ ಚಟುವಟಿಕೆಗಳನ್ನು ಮಾತ್ರ ಮಾಡಲಾಗುವುದು. ಅರಣ್ಯೇತರ ಉದ್ದೇಶಕ್ಕೆ ಬಳಕೆ ಮಾಡುವುದಿಲ್ಲ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಸಿಎಸ್.ಆರ್. ನಿಧಿ ಬಳಕೆ: ಈ ಉದ್ಯಾನವನದ ನಿರ್ಮಾಣಕ್ಕೆ ಆರಂಭಿಕವಾಗಿ 20 ಕೋಟಿ ರೂ. ಮಂಜೂರು ಮಾಡಿ ಡಿಪಿಆರ್ ಮತ್ತು ಆರಂಭಿಕ ಕಾಮಗಾರಿ ಆರಂಭಿಸಲಾಗುವುದು. ಜೊತೆಗೆ ಸಾಂಸ್ಥಿಕ ಕಂಪೆನಿಗಳು ಕೈಜೋಡಿಸಿ ಸಿ.ಎಸ್.ಆರ್. ನಿಧಿ ನೀಡಿದರೆ, ಮುಂದಿನ ಮೂರು ವರ್ಷದೊಳಗೆ ಈ ಉದ್ಯಾನ ಪೂರ್ಣಗೊಳಿಸಿ, ಇದೇ ಸರಕಾರದ ಅವಧಿಯಲ್ಲಿ ಉದ್ಘಾಟಿಸುವುದು ತಮ್ಮ ಗುರಿಯಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.