ಪೊಲೀಸರ ಆರೋಗ್ಯ ತಪಾಸಣೆಗಾಗಿ ಸಮಗ್ರ ಯೋಜನೆ ಜಾರಿಗೆ ಕೋರಿದ್ದ ಪಿಐಎಲ್ ಇತ್ಯರ್ಥ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಪೊಲೀಸರ ಆರೋಗ್ಯ ತಪಾಸಣೆಗೆ ಸಮಗ್ರ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಎನ್. ಲೀಲಾವತಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ವಿಷಯ ಹಾಗೂ ಮನವಿಗಳು ಗಂಭೀರವಾಗಿದೆ. ಈ ಕುರಿತು ಸರ್ಕಾರದ ಸಂಬಂಧಪಟ್ಟ ಇಲಾಖೆಗಳು/ ಪ್ರಾಧಿಕಾರಗಳು ಗಮನಿಸಬೇಕು. ಅದಕ್ಕಾಗಿ ನ್ಯಾಯಾಲಯ ಪ್ರತ್ಯೇಕ ಆದೇಶ ಹೊರಡಿಸುವ ಅಗತ್ಯವಿಲ್ಲ. ಒಂದೊಮ್ಮೆ ಅರ್ಜಿದಾರರ ಮನವಿಗಳ ಬಗ್ಗೆ ಸಂಬಂಧಟ್ಟ ಇಲಾಖೆ/ಪ್ರಾಧಿಕಾರಗಳು ಗಮನ ಹರಿಸದಿದ್ದರೆ, ನಂತರ ಈ ಕುರಿತು ಮನವಿ ಸರ್ಕಾರ ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿದೆ.
ಮನವಿ ಏನು?
ರಾಜ್ಯದಲ್ಲಿ ಶೇ.80 ಪೊಲೀಸರು ಬೊಜ್ಜು ಹಾಗೂ ಶೇ.87 ಪೊಲೀಸರು ಕಡಿಮೆ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಹುತೇಕ ಪೊಲೀಸರು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ, ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಪೊಲೀಸರ ದೈಹಿಕ ಹಾಗೂ ಮಾನಸಿಕ ಕ್ಷಮತೆ ಕುರಿತು ತಪಾಸಣೆ ನಡೆಸಲು ಸಮಗ್ರ ಯೋಜನೆ ಜಾರಿಗೆ ತರಬೇಕು. ಆ ಯೋಜನೆಯಡಿ ವರ್ಷಕ್ಕೊಮ್ಮೆ ಕಡ್ಡಾಯವಾಗಿ ತಜ್ಞ ವೈದ್ಯರು ಪೊಲೀಸರ ಆರೋಗ್ಯ ತಪಾಸಣೆ ನಡೆಸಬೇಕು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆ, ಭ್ರಷ್ಟಾಚಾರ ಆರೋಪಗಳ ಪಟ್ಟಿಯನ್ನು ಪ್ರತಿ ತಿಂಗಳು ಪ್ರಕಟಿಸಬೇಕು ಎಂದು ಅರ್ಜಿದಾರರು ಕೋರಿದ್ದರು.