ಆಂಧ್ರದಲ್ಲಿ ರಸ್ತೆ ಅಪಘಾತ: ತುಮಕೂರಿನ ಮೂವರು ಯುವಕರು ಮೃತ್ಯು
ಗೆಳೆಯನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಘಟನೆ

ತುಮಕೂರು: ಆಂಧ್ರ ಪ್ರದೇಶ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತುಮಕೂರಿನ ಮೂವರು ಗೆಳೆಯರು ಮೃತಪಟ್ಟ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಮೃತರನ್ನು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಕೆಂಕೆರೆ ನವೀನ್ ಚಿಕ್ಕನಾಯಕನಹಳ್ಳಿ, ಪ್ರಥಮ ದರ್ಜೆ ಗುತ್ತಿಗೆದಾರ, ತುಮಕೂರು ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಸಂತೋಷ್ ಕುಮಾರ್ ಮತ್ತು ಕೆಂಕೆರೆ ನಿವಾಸಿ ಲೋಕೇಶ್(ಕಾಮಶೆಟ್ಟಿ) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಉಳಿದ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ರವಿವಾರ (ಮೇ 18ರಂದು) ಸಂತೋಷ್ ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಗೆಳೆಯರಾಗಿರುವ ಈ ಆರು ಮಂದಿ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ಅಲ್ಲಿಂದ ರವಿವಾರ ಬೆಳಗ್ಗೆ ಶ್ರೀಶೈಲಕ್ಕೆ ಹೋಗಿ ನಂತರ ಮಹಾನಂದಿ ದರ್ಶನ ಮಾಡಿ ವಾಪಸ್ ಬರುತ್ತಿದ್ದ ವೇಳೆ ರಾತ್ರಿ 7:30ರ ಸುಮಾರಿಗೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.