ಆಡಳಿತ ಜನರ ಬಳಿಗೆ ಹೋಗಬೇಕು, ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕೊಡಬೇಕು: ಸಚಿವ ಮಂಕಾಳ ವೈದ್ಯ

ಭಟ್ಕಳ: "ಆಡಳಿತ ಚುರುಕಾಗಬೇಕು, ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಸಿಗಬೇಕು ಎಂಬ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಯೋಜನೆಗಳು ಬಡವರಿಗೆ ನೇರವಾಗಿ ತಲುಪಬೇಕು, ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಬೇಕು," ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶಾನಭಾಗ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸಚಿವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಇದು ಜಿಲ್ಲೆಯ ಆರನೇ ಜನಸ್ಪಂದನ ಕಾರ್ಯಕ್ರಮವಾಗಿದೆ. "ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿ ಸಲಾಗಿದೆ. ಹಿಂದಿನ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸ್ವೀಕರಿಸಿದ ಅರ್ಜಿಗಳ ಪೈಕಿ 90% ವಿಲೇವಾರಿಯಾಗಿದ್ದು, ಉಳಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆದಿದೆ," ಎಂದು ಸಚಿವರು ತಿಳಿಸಿದರು.
"ನೀವು ನಿಮ್ಮ ಸಮಸ್ಯೆಗಳನ್ನು ಹೊತ್ತು ಇಲ್ಲಿಗೆ ಬಂದಿದ್ದೀರಿ. ನಾವು ನಿಮ್ಮ ಜಾಗಕ್ಕೆ ಬಂದು ಅರ್ಜಿಗಳನ್ನು ಸ್ವೀಕರಿಸುತ್ತೇವೆ. ಇಲ್ಲಿ ಪರಿಹಾರವಾಗದ ಅರ್ಜಿಗಳನ್ನು ಕೆಲವೇ ದಿನಗಳಲ್ಲಿ ಇತ್ಯರ್ಥಪಡಿಸಲಾಗುವುದು. ಈ ಕಾರ್ಯಕ್ರಮ ಕೇವಲ ಕಾಟಾಚಾರಕ್ಕಾಗಿ ಅಲ್ಲ, ಜನರು ಯಾವುದೇ ಕೆಲಸಕ್ಕೆ ನೇರವಾಗಿ ಬಂದು ಪರಿಹಾರ ಪಡೆಯಬಹುದು," ಎಂದು ಅವರು ಭರವಸೆ ನೀಡಿದರು. ಕಂದಾಯ ಇಲಾಖೆಯಲ್ಲಿ ಏಜೆಂಟರ ಹಾವಳಿಯನ್ನು ತಪ್ಪಿಸಿ, ಜನರು ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಕೆಲಸ ಮಾಡಿಕೊಳ್ಳಬಹುದು ಎಂದರು. "ಸಣ್ಣ ಸಮಸ್ಯೆಗಳಿಗೆ ಜನರು ಕಾರವಾರದ ಜಿಲ್ಲಾಧಿಕಾರಿಗಳ ಬಳಿ ಹೋಗುವ ಪರಿಸ್ಥಿತಿ ಇರಬಾರದು. ಸ್ಥಳೀಯ ಮಟ್ಟದಲ್ಲೇ ಪರಿಹಾರ ಸಿಗಬೇಕು. ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಪರಿಹಾರ ಸಾಧ್ಯವಾಗದಿದ್ದರೆ, ರಾಜ್ಯ ಮಟ್ಟದಲ್ಲಿ ನಾವು ಪರಿಹಾರ ಕೊಡುತ್ತೇವೆ," ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ 12 ತಾಲೂಕುಗಳ 24 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಮತ್ತು ಕ್ರೋಮ್ಬುಕ್ಗಳನ್ನು ವಿತರಿಸಲಾಯಿತು. ನೇಮಕಾತಿ ಆದೇಶ ಪತ್ರಗಳನ್ನು ಮಂಜೂರು ಮಾಡಲಾ ಯಿತು. ಮೀನುಗಾರಿಕೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ನಿಧನರಾದವರ ಕುಟುಂಬಗಳಿಗೆ ಸಂಕಷ್ಟ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿಗಳ ಮಂಜೂರಾತಿ ಪತ್ರವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಗ್ಯಾರಂಟಿ ಯೋಜನೆಗಳ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ್, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಈಶ್ವರ್ ಕಾಂದೂ, ಭಟ್ಕಳ ಸಹಾಯಕ ಆಯುಕ್ತೆ ಕಾವ್ಯರಾಣಿ, ಕುಮಟ ಸಹಾಯಕ ಆಯುಕ್ತ ಕನಿಷ್ಕ, ತಹಸೀಲ್ದಾರ್ ನಾಗೇಂದ್ರ ಕೊಳ ಶೆಟ್ಟಿ, ಪುರಸಭೆ ಅಧ್ಯಕ್ಷ ಅಲ್ತಾಫ್ ಖರೂರಿ ಉಪಸ್ಥಿತರಿದ್ದರು. ಭಟ್ಕಳ ಸಹಾಯಕ ಆಯುಕ್ತೆ ಕಾವ್ಯರಾಣಿ ಸ್ವಾಗತಿಸಿದರು.
ನಂತರ, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಜನರು ತಮ್ಮ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸಚಿವರು ಹಾಗೂ ಅಧಿಕಾರಿಗಳ ಮುಂದಿಟ್ಟರು.