ವಿಜಯಪುರ | ಸರಣಿ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ ಆರು ಮಂದಿ ಮೃತ್ಯು

ವಿಜಯಪುರ: ಖಾಸಗಿ ಬಸ್, ಕಾರು ಮತ್ತು ಲಾರಿಯೊಂದರ ಮಧ್ಯೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಆರು ಮಂದಿ ಮೃತಪಟ್ಟ ಘಟನೆ ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್.ಎಚ್.– 50) ಬುಧವಾರ ಬೆಳಗ್ಗೆ ಸಂಭವಿಸಿದೆ,
ಮೃತರನ್ನು ಸ್ಕಾರ್ಪಿಯೋ ವಾಹನದಲ್ಲಿದ್ದ ತೆಲಂಗಾಣ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಪುತ್ರಿ ಜೋಸ್ನ್ಯಾ, ಪುತ್ರ ಅಭಿರಾಮ, ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ಖಾಸಗಿ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ್ ಎಂದು ಗುರುತಿಸಲಾಗಿದೆ.
ಭಾಸ್ಕರನ್ ಅವರ ಪುತ್ರ ಇನ್ನೋರ್ವ ಪ್ರವೀಣ್ ತೇಜ(10) ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪಾರ್ಪಿಯೊ ಕಾರು, ಖಾಸಗಿ ಮತ್ತು ಲಾರಿಯೊಂದರ ಮಧ್ಯೆ ಈ ಅಪಘಾತ ಸಂಭವಿಸಿದೆ.
ಸೋಲಾಪುರದತ್ತ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ಗೆ ಢಿಕ್ಕಿ ಹೊಡೆದು ಪಕ್ಕದ ರಸ್ತೆ ಹಾರಿ ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಬಳಿಕ ಇದೇ ರಸ್ತೆಯಲ್ಲಿ ಬರುತ್ತಿದ್ದ ಲಾರಿಗೂ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಐವರು ಹಾಗೂ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.